ಮೈಸೂರು : ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಸಂಬಂಧಿತ ಗೊಂದಲವು ಬಗೆಹರಿಯದೇ ತರಗತಿಗಳು ನಡೆಯುತ್ತಿಲ್ಲ. ತರಗತಿಗಳು ನಡೆದು ಪಾಠಗಳು ಸಂಪೂರ್ಣಗೊಳ್ಳುವವರೆಗೂ ಪರೀಕ್ಷೆಗಳನ್ನು ನಡೆಸದಂತೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಎಐಡಿಎಸ್ಒ ಸಂಘಟನೆಯೊಂದಿಗೆ ಹಳೇ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆಯಲ್ಲಿ ಹೋರಾಟಗಾರರಾದ ಉಗ್ರನರಸಿಂಹಗೌಡ ಮಾತನಾಡಿ, 'ರಾಜ್ಯ ಸರ್ಕಾರವು ಶೈಕ್ಷಣಿಕ ವಿಷಯಗಳಲ್ಲಿ ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.ಕಾಲೇಜು ಪ್ರಾರಂಭವಾಗಿ ದಿನಗಳೇ ಉರುಳಿದರೂ, ತರಗತಿಗಳು ಸರಿಯಾಗಿ ನಡೆದಿಲ್ಲ. ಈ ನಡುವೆ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆ ಹೊರಡಿಸಿರುವ ವಿವಿಗಳ ಧೋರಣೆ ಖಂಡನೀಯವಾಗಿದೆ. ವಿವಿಗಳು ಮೊದಲು ತರಗತಿಗಳ ಪಠ್ಯ ಮುಗಿಸಿ, ನಂತರ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ. ಅತಿಥಿ ಉಪನ್ಯಾಸಕರಿಲ್ಲದೇ ಒಂದು ತರಗತಿ ನಡೆಯದಿದ್ದರೂ ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆ ಹೊರಡಿಸಿದ್ದಾರೆ. ತರಗತಿಗಳನ್ನು ನಡೆಸದೇ ಪರೀಕ್ಷೆಗಳನ್ನು ಎದುರಿಸಲು ಸಾಧ್ಯವಿಲ್ಲ. ಹಾಗಾಗಿ ಈ ಕೂಡಲೇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಒತ್ತಾಯಿದ್ದಾರೆ.ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಚಂದ್ರಕಲಾ ಮಾತನಾಡಿ, ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೇ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ ಎಂದು ಹೇಳಿದ್ದಾರೆ.ಇದನ್ನೂ ಓದಿ : ದಸರಾ ದೀಪಾಲಂಕಾರದಿಂದಾಗಿ ಜಗಮಗಿಸಿದ ಅರಮನೆ ನಗರಿ: ವಿಡಿಯೋ - DASARA LIGHTS
Be the first to comment