ಮೈಸೂರು: ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಚಿಕ್ಕ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯ ತೆಪ್ಪೋತ್ಸವ ವಿಜೃಂಭಣೆಯಿಂದ ನಡೆಯಿತು.ಇದಕ್ಕೂ ಮುನ್ನ, ಪಾರ್ವತಿ ಸಮೇತ ಶ್ರೀ ನಂಜುಂಡೇಶ್ವರ ಸ್ವಾಮಿಯವರ ಉತ್ಸವ ಮೂರ್ತಿಗಳನ್ನು ನದಿ ತೀರದ ಮಂಟಪದಲ್ಲಿಟ್ಟು ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್ ನೇತೃತ್ವದ ತಂಡ ವೇದ ಮಂತ್ರಗಳನ್ನು ಪಠಿಸಿ, ಉತ್ಸವ ಮೂರ್ತಿಗಳಿಗೆ ಮಹಾಮಂಗಳಾರತಿ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಅಲ್ಲಿಂದ ಕಪಿಲಾ ನದಿಯಲ್ಲಿ ಬಣ್ಣ ಬಣ್ಣದ ಹೂವುಗಳು ಹಾಗೂ ಆಕರ್ಷಕ ವಿದ್ಯುತ್ ದೀಪಾಲಂಕಾರದಿಂದ ತೇಲುವ ದೋಣಿಯಲ್ಲಿ ಮೂರ್ತಿಗಳನ್ನಿಟ್ಟು, ಪೂರ್ವ ಪಶ್ಚಿಮವಾಗಿ ಮೂರು ಸುತ್ತು ಪ್ರದಕ್ಷಿಣೆ ಮಾಡಲಾಯಿತು. ತೆಪ್ಪೋತ್ಸವ ಮುಗಿದ ಬಳಿಕ ಉತ್ಸವ ಮೂರ್ತಿಗಳನ್ನು ಮಂಗಳವಾದ್ಯದೊಂದಿಗೆ ಪಟ್ಟಣದ ರಥ ಬೀದಿಯಲ್ಲಿ ಅದ್ಧೂರಿ ಮೆರವಣಿಗೆ ಮಾಡಲಾಯಿತು. ದಾರಿಯುದ್ದ ನೆರೆದಿದ್ದ ಭಕ್ತರು ದೇವರ ಉತ್ಸವ ಮೂರ್ತಿಗಳನ್ನು ಕಂಡು, ಪೂಜೆ ಸಲ್ಲಿಸಿದರು. ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರು.ಇದನ್ನೂ ಓದಿ: ನಂಜನಗೂಡಿನಲ್ಲಿ ವಿಜೃಂಭಣೆಯಿಂದ ಜರುಗಿದ ಚಿಕ್ಕಜಾತ್ರೆ; ರಥೋತ್ಸವಕ್ಕೆ ಕೈ ಮುಗಿದ ಭಕ್ತಾದಿಗಳು
Be the first to comment