ಚಾಮರಾಜನಗರ: ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹನೂರು ತಾಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವಲಯ ವ್ಯಾಪ್ತಿಯ ಗುಂಡಿಮಾಳ ಹಾಗೂ ನೆಲ್ಲಿಕತ್ರಿ ಅರಣ್ಯದಲ್ಲಿ ನಡೆದಿದೆ.ಬಿಆರ್ಟಿ ವನ್ಯಜೀವಿ ವಲಯ ವ್ಯಾಪ್ತಿಯ ನೆಲ್ಲಿಕತ್ರಿ ಅರಣ್ಯ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನದ ಹೊತ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಹಾಗೂ ಗಾಳಿ ಹೆಚ್ಚಾಗಿರುವುದರಿಂದ ಏಕಾಏಕಿ ಬೆಂಕಿ ವ್ಯಾಪಿಸಿ ಸುಮಾರು 30 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯ ಗುಂಡಿಮಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ ಬೈಲೂರು ವನ್ಯಜೀವಿ ವಲಯ ಆರ್ಎಫ್ಒ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದರು.ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವರ್ಗದವರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ, ಕಾಡ್ಗಿಚ್ಚು ಹರಡದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಬಿಆರ್ ಟಿ ಡಿಸಿಎಫ್ ಪ್ರತಿಕ್ರಿಯಿಸಿದ್ದು, ಬೈಲೂರು ವಲಯ ವ್ಯಾಪ್ತಿಯಲ್ಲಿ 15 ಎಕರೆ ಹಾಗೂ ಗುಂಡಿಮಾಳ ಅರಣ್ಯ ಪ್ರದೇಶದಲ್ಲಿ 20 ಎಕರೆಯಷ್ಟು ಪ್ರದೇಶ ಕಾಡ್ಗಿಚ್ಚಿಗೆ ಆಹುತಿಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳ ಜಂಟಿ ಕಾರ್ಯಚರಣೆಯಿಂದ ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಹುಲಿ ಸೆರೆಯಾದ ಊರಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ; ಡ್ರೋನ್ ಕ್ಯಾಮೆರಾದಲ್ಲಿ ಅರಣ್ಯ ಇಲಾಖೆ ನಿಗಾ
Comments