ಚಿಕ್ಕಮಗಳೂರು: ರಾತ್ರಿ ಸುರಿದ ಧಾರಾಕಾರ ಮಳೆ ಹಾಗೂ ಬಿರುಗಾಳಿಗೆ ನಗರದ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಜೀವನ ಅಸ್ತವ್ಯಸ್ತಗೊಂಡಿದೆ. ಕೋಟೆ ಬಡಾವಣೆಯಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ಕೆಲವು ಮನೆಗಳ ಮೇಲ್ಛಾವಣಿಯ ಹೆಂಚುಗಳು ಹಾರಿ ಹೋಗಿವೆ. ಕೋರ್ಟ್ ಮುಂಭಾಗದಲ್ಲಿ ಹತ್ತಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ವಿದ್ಯುತ್ ಸರಬರಾಜು ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ. ಐಬಿ ಕಚೇರಿ ಮುಂಭಾಗದ ಕಾಂಪೌಂಡ್ ಗೋಡೆ ಕುಸಿದಿರುವುದು ವರದಿಯಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳು ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.ಗಾಳಿ-ಮಳೆಯ ತೀವ್ರತೆಗೆ ನಗರದ ಹಲವೆಡೆ ವಿದ್ಯುತ್ ತಂತಿಗಳು ತುಂಡಾಗಿದ್ದು, ಸುರಕ್ಷತಾ ದೃಷ್ಟಿಯಿಂದ ವಿದ್ಯುತ್ ಇಲಾಖೆಯ ಸಿಬ್ಬಂದಿ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದಾರೆ. ಹಾಗಾಗಿ ಚಿಕ್ಕಮಗಳೂರು ನಗರದ ಶೇಕಡ 60 ರಷ್ಟು ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೊಬೈಲ್ ಚಾರ್ಜಿಂಗ್, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಹಲವು ಮೂಲ ಸೌಲಭ್ಯಗಳ ಮೇಲೂ ಇದರ ಪರಿಣಾಮ ಬೀರಿದೆ.ಹಾನಿ ಸರಿಪಡಿಸಲು ನಗರಸಭೆ, ಮೆಸ್ಕಾಂ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಳಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದಾರೆ. ರಸ್ತೆಗಳಿಗೆ ಬಿದ್ದ ಮರಗಳನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದ್ದು, ವಿದ್ಯುತ್ ಕಂಬಗಳನ್ನು ಮರುಸ್ಥಾಪಿಸಿ ವಿದ್ಯುತ್ ಸಂಪರ್ಕ ಪುನಃ ಕಲ್ಪಿಸಲು ಮೆಸ್ಕಾಂ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.ಇದನ್ನೂ ನೋಡಿ: ಬೆಂಗಳೂರಲ್ಲಿ ಧಾರಾಕಾರ ಮಳೆ: ಆಟೋ ಮೇಲೆ ಕಾಂಪೌಂಡ್ ಕುಸಿದು ಚಾಲಕ ಸ್ಥಳದಲ್ಲೇ ಸಾವು
Comments